ಬೆಳಗಾವಿ: ಜಿಲ್ಲೆಯ ಪ್ರಮುಖ ಜಲಾಶಯಗಳಲ್ಲಿ ಒಂದಾದ ಹುಕ್ಕೇರಿ ತಾಲೂಕಿನ ರಾಜಾ ಲಖಮಗೌಡ (ಹಿಡಕಲ್) ಜಲಾಶಯ ಶೇ.100ರಷ್ಟು ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಘಟಪ್ರಭಾ ನದಿಗೆ ಹರಿಸಲಾಗುತ್ತಿದೆ. ಜಲಾಶಯ ಭರ್ತಿಯಾಗಿರುವುದು ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳ ರೈತರಲ್ಲಿ ಸಂತಸ ಮೂಡಿಸಿದೆ.
51 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಹಿಡಕಲ್ ಜಲಾಶಯಕ್ಕೆ ಸದ್ಯ ಸುಮಾರು 9 ಸಾವಿರ ಕ್ಯೂಸೆಕ್ ನೀರು ಒಳಹರಿವಾಗುತ್ತಿದೆ. ಜಲಾಶಯದ ಒಟ್ಟು 10 ಗೇಟ್ಗಳ ಪೈಕಿ 2 ಗೇಟ್ಗಳನ್ನು ತೆರೆಯಲಾಗಿದ್ದು, ಅವುಗಳ ಮೂಲಕ ಸುಮಾರು 3 ಸಾವಿರ ಕ್ಯೂಸೆಕ್ ನೀರನ್ನು ಘಟಪ್ರಭಾ ನದಿಗೆ ಬಿಡಲಾಗುತ್ತಿದೆ.
ಹಿಡಕಲ್ ಜಲಾಶಯ ಭರ್ತಿ: ಘಟಪ್ರಭಾ ನದಿಗೆ 3 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
ಇದರ ಜೊತೆಗೆ ವಿದ್ಯುತ್ ಉತ್ಪಾದನೆ ಹಾಗೂ ವಿವಿಧ ಕಾಲುವೆಗಳ ಮೂಲಕವೂ ನೀರನ್ನು ಹೊರಬಿಡಲಾಗುತ್ತಿದೆ. ಒಟ್ಟಾರೆ ಸುಮಾರು 6 ಸಾವಿರ ಕ್ಯೂಸೆಕ್ ನೀರು ವಿವಿಧ ಮಾರ್ಗಗಳಲ್ಲಿ ಹೊರಹರಿಯುತ್ತಿದೆ.
ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಈ ಭಾಗದ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲವಾಗುವ ನಿರೀಕ್ಷೆ ಇದೆ. ಜಲಾಶಯದಿಂದ ನೀರು ಹೊರಬಿಡುತ್ತಿರುವ ಹಿನ್ನೆಲೆಯಲ್ಲಿ ಘಟಪ್ರಭಾ ನದಿ ಪಾತ್ರದ ಜನರು ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
