ಬೆಳಗಾವಿ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ದುರಸ್ತಿ ಹಾಗೂ ಗುಂಡಿ ಮುಚ್ಚುವ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಶನಿವಾರ ಕುವೆಂಪು ನಗರದಲ್ಲಿ ನಡೆಯುತ್ತಿದ್ದ ರಸ್ತೆ ದುರಸ್ತಿ ಕಾಮಗಾರಿಯನ್ನು ಮಾಜಿ ಸಚಿವೆ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಅವರು ಪರಿಶೀಲಿಸಿದರು.
ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ರಸ್ತೆ ದುರಸ್ತಿ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಳ್ಳಬೇಕು. ಗಣೇಶೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಅವರು, ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯಿಂದ ಕೈಗೊಳ್ಳಲಾಗುತ್ತಿರುವ ರಸ್ತೆ ದುರಸ್ತಿ ಸೇರಿದಂತೆ ವಿವಿಧ ಕಾಮಗಾರಿಗಳು ಹಾಗೂ ಹಬ್ಬದ ಸಿದ್ಧತೆಗಳ ಕುರಿತು ಶಾಸಕರಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ನಗರ ಸೇವಕರಾದ ವೀಣಾ ವಿಜಾಪೂರ, ಮುಷ್ತಾಕ ಮುಲ್ಲಾ, ಪಾಲಿಕೆ ಅಭಿಯಂತರರಾದ ಜಗದೀಶ, ಅಕ್ಷತಾ, ಸುಶಾಂತ ಕಾಂಬಳೆ ಸೇರಿದಂತೆ ಪಾಲಿಕೆ ಸಿಬ್ಬಂದಿ ಹಾಗೂ ಬಡಾವಣೆಯ ನಾಗರಿಕರು ಉಪಸ್ಥಿತರಿದ್ದರು.
